ಬಾಂಗ್ಲಾದೇಶದಲ್ಲಿ ಅಟ್ಟಹಾಸ: ಧರ್ಮನಿಂದೆಯ ಆರೋಪ ಹೊರಿಸಿ ಹಿಂದೂ ಯುವಕನ ಬರ್ಬರ ಹತ್ಯೆ; ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಉನ್ಮಾದಿತ ಗುಂಪು!

ಢಾಕಾ: ಬಾಂಗ್ಲಾದೇಶದಲ್ಲಿ ಮೂಲಭೂತವಾದದ ಕಿಚ್ಚು ಮತ್ತೊಮ್ಮೆ ಭುಗಿಲೆದ್ದಿದ್ದು, ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕನೊಬ್ಬನನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ. ಮೃತ ವ್ಯಕ್ತಿಯನ್ನು ಭಲುಕಾ ಉಪ ಜಿಲ್ಲೆಯ ಜವಳಿ ಕಾರ್ಖಾನೆಯ ಉದ್ಯೋಗಿ ದೀಪು ಚಂದ್ರ ದಾಸ್ ಎಂದು ಗುರುತಿಸಲಾಗಿದ್ದು, ಧರ್ಮನಿಂದೆಯ ಸುಳ್ಳು ಆರೋಪ ಹೊರಿಸಿ ಉನ್ಮಾದಿತ ಗುಂಪೊಂದು ಈ ಅಮಾನವೀಯ ಕೃತ್ಯ ಎಸಗಿದೆ.


ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸ್ಥಳೀಯರ ಗುಂಪೊಂದು ದೀಪು ಚಂದ್ರ ಅವರ ಮೇಲೆರಗಿದೆ. ಹಂತಕರು ದೀಪು ಅವರನ್ನು ಹಿಡಿದು ಮರಕ್ಕೆ ಕಟ್ಟಿ ಅರೆಜೀವವಾಗುವಂತೆ ಥಳಿಸಿ ಕೊಲೆ ಮಾಡಿದ್ದಲ್ಲದೆ, ನಂತರ ಅವರ ದೇಹಕ್ಕೆ ಬೆಂಕಿ ಹಚ್ಚುವ ಮೂಲಕ ವಿಕೃತಿಯ ಪರಾಕಾಷ್ಠೆ ಮೆರೆದಿದ್ದಾರೆ. ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದು, ಸುಟ್ಟ ಸ್ಥಿತಿಯಲ್ಲಿದ್ದ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಮೆನ್ಸಿಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯ ನಂತರ ಬಾಂಗ್ಲಾದೇಶದಾದ್ಯಂತ ಅರಾಜಕತೆ ಸೃಷ್ಟಿಯಾಗಿದ್ದು, ಇದರ ಮರೆಯಲ್ಲಿ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ. ಪ್ರತಿಭಟನಾಕಾರರು ಕೇವಲ ಅವಾಮಿ ಲೀಗ್ ನಾಯಕರ ಮನೆಗಳ ಮೇಲೆ ಮಾತ್ರವಲ್ಲದೆ, ಪತ್ರಿಕಾ ಕಚೇರಿಗಳು ಮತ್ತು ಐತಿಹಾಸಿಕ ಸ್ಮಾರಕಗಳ ಮೇಲೆಯೂ ದಾಳಿ ನಡೆಸಿ ಧ್ವಂಸಗೊಳಿಸುತ್ತಿದ್ದಾರೆ. ಢಾಕಾ ಮತ್ತು ಚಿತ್ತಗಾಂಗ್ ನಗರಗಳಲ್ಲಿ ಭಾರತ ವಿರೋಧಿ ಘೋಷಣೆಗಳು ಮೊಳಗುತ್ತಿದ್ದು, ಭಾರತೀಯ ರಾಯಭಾರಿ ಕಚೇರಿಗಳ ಮೇಲೆ ಕಲ್ಲು ತೂರಾಟ ನಡೆಸಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸುತ್ತಿದೆ. ಈ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ಮೃತರ ಕುಟುಂಬದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದೀಪು ಚಂದ್ರ ದಾಸ್ ಅವರ ಈ ಬರ್ಬರ ಹತ್ಯೆಯು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ಜೀವಭಯ ಮತ್ತು ಅತಂತ್ರ ಸ್ಥಿತಿಯನ್ನು ಜಗತ್ತಿನ ಮುಂದೆ ಅನಾವರಣಗೊಳಿಸಿದೆ.
