“ಒಗ್ಗಟ್ಟಿನ ಮಂತ್ರ ಜಪಿಸಿದ ಶ್ರೀನಿವಾಸ್ ದಾಸಕರಿಯಪ್ಪ: ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ”

ದಾವಣಗೆರೆ : ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.
ಫೆ.1 ರಂದು 1981 ರಲ್ಲಿ ಜನಿಸಿರುವ ಶ್ರೀನಿವಾಸ್ ಕರಿಯಪ್ಪ ಅವರು ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮಾಹಿತಿ ತಂತ್ರಜ್ಞಾನದಲ್ಲಿ ಪದವಿ (ಐಟಿ) ಪಡೆದಿರುವ ಅವರು, ಸಮಾಜ ಸೇವೆ ಮೂಲಕ ರಾಜಕೀಯಕ್ಕೆ ಬಂದಿದ್ದಾರೆ. ತಂದೆ ದಾಸಕರಿಯಪ್ಪ ಅವರು ಜೆಡಿಎಸ್ ಅಧಿಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.ಕಳೆದ 20 ವರ್ಷಗಳಿಂದ ಬಿಜೆಪಿಯಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ 5 ವರ್ಷ ಹಾಗೂ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಶ್ರೀನಿವಾಸ್ ದಾಸಕರಿಯಪ್ಪ ಅವರು ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದಶ್ವರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಮಾತ್ರವಲ್ಲ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಣದ ವಿರುದ್ಧ ಯಾವುದೇ ಮಾತನಾಡಿರಲಿಲ್ಲ. ವಿರೋಧವೂ ವ್ಯಕ್ತಪಡಿಸಿರಲಿಲ್ಲ. ಎರಡು ಬಣಗಳ ಜೊತೆ ಉತ್ತಮ ಒಡನಾಟ ಹೊಂದಿದ್ದ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಬಿಜೆಪಿ ಮಣೆ ಹಾಕುವ ಮೂಲಕ ತಂತ್ರಗಾರಿಕೆ ನಡೆಸಿದೆ.ಯಶವಂತ ರಾವ್ ಜಾಧವ್, ಅಜಯ್ ಕುಮಾರ್ ಸೇರಿದಂತೆ ಅನೇಕರು ಬಿಜೆಪಿ ಟಿಕೆಟ್ ಗೆ ಪೈಪೋಟಿ ನಡೆಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಿ ಕೊನೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ.ಬಿ ವಿನಯ್ ಕುಮಾರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಒಲವು ತೋರಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಎಲ್ಲ ಲೆಕ್ಕಚಾರಗಳನ್ನು ತಲೆಕೆಳಗಾಗಿದ್ದು, ಬಿಜೆಪಿ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಿದೆ.
ಶ್ರೀನಿವಾಸ ದಾಸಕರಿಯಪ್ಪ ಮಾತನಾಡಿ, ‘ಮಾಜಿ ಸಂಸದ ಸಿದ್ದೇಶ್ವರ ರವೀಂದ್ರನಾಥ, ರೇಣುಕಾಚಾರ್ಯ ಸೇರಿದಂತೆ ಪಕ್ಷದ ಎಲ್ಲಾ ಮುಖಂಡ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ವಿರುದ್ಧ ಚುನಾವಣೆ ನಡೆಸುತ್ತೇವೆ. ಯಶವಂತರಾವ್ ಜಾಧವ್, ಅಜಯಕುಮಾರ್, ದೇವರಮನೆ ಶಿವಕುಮಾರ್, ರಾಜನಹಳ್ಳಿ ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಒಟಾಗಿ ಚುನಾವಣೆ ಎದುರಿಸುತೇವೆ. ಈ ಬಾರಿ ದಕಿಣದಲಿ ಬಿಜೆಪಿ ಗೆಲುವು ಸಾಧಿಸಲಿದೆ’ ಎಂದರು.