ಶ್ರೀಶೈಲಂ ಸುರಂಗ ಕುಸಿತ: 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ, ಇನ್ನೂ 7 ಮಂದಿ ನಾಪತ್ತೆ

ಹೈದರಬಾದ್: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದ ಮೇಲ್ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರನ್ನು ಪತ್ತೆಹಚ್ಚಬೇಕಿದೆ. ಮೃತ ಕಾರ್ಮಿಕನನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಮೃತದೇಹ ಯಂತ್ರದೊಳಗೆ ಸಿಲುಕಿಕೊಂಡಾಗ ಪತ್ತೆಯಾಗಿದೆ. ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಹಾಗೂ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ 56 ಕಾರ್ಮಿಕರು ಒಳಗೆ ಸಿಲುಕಿದ್ದರು. ಈ ಪೈಕಿ 48 ಜನರನ್ನು ಆರಂಭದಲ್ಲಿಯೇ ರಕ್ಷಿಸಲಾಗಿದ್ದು, 8 ಕಾರ್ಮಿಕರು ಸಿಲುಕಿಕೊಂಡಿದ್ದರು. ಕಾರ್ಮಿಕರನ್ನು ಪತ್ತೆಹಚ್ಚಲು ಕಳೆದ 17 ದಿನಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಭಾನುವಾರ ಓರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಫೆ.22 ರಂದು ಸುರಂಗ ಕುಸಿತದ ಬಳಿಕ ಸ್ಥಳದಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಉತ್ತರಾಖಂಡದ ರ್ಯಾಟ್ ಮೈನರ್, ಸ್ನಿಫರ್ ನಾಯಿ ಸೇರಿದಂತೆ 300ಕ್ಕೂ ಅಧಿಕ ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ 17 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ.