ಪ್ರವಾಸಿಗರ ಸುರಕ್ಷತೆ ವಿಚಾರದ ಪಿಐಎಲ್ಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ನವದೆಹಲಿ :ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ, ಜಮ್ಮು ಮತ್ತು ಕಾಶ್ಮೀರದ ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದ ವಕೀಲ ವಿಶಾಲ್ ತಿವಾರಿ ಅವರನ್ನು ತರಾಟೆಗೆ ತೆಗೆದುಕೊಂಡು , ಇದು ಯಾವುದೇ ಸಾರ್ವಜನಿಕ ಕಾರಣವಿಲ್ಲದ, ಪ್ರಚಾರದ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಚಾಟಿ ಬೀಸಿದೆ .
ನಿಮ್ಮ ನಿಜವಾದ ಉದ್ದೇಶವೇನು? ನೀವು ಈ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಏಕೆ ಸಲ್ಲಿಸಿದ್ದೀರಿ? ಈ ವಿಷಯದ ಸೂಕ್ಷ್ಮತೆಯನ್ನು ನೀವು ಅರ್ಥಮಾಡಿಕೊಳ್ಳುತ್ತಿಲ್ಲವೇ? ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲು ನೀವು ಅನಗತ್ಯ ವೆಚ್ಚಕ್ಕೆ ದಾರಿ ಮಾಡಿಕೊಂಡಿದ್ದೀರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ತಿವಾರಿ ಅವರು ಹೇಳಿದ್ದಾರೆ.
ಅರ್ಜಿದಾರರು ಒಂದರ ನಂತರ ಒಂದರಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ, ಇದರ ಪ್ರಾಥಮಿಕ ಉದ್ದೇಶ ಸಾರ್ವಜನಿಕ ಹಿತಾಸಕ್ತಿಯಲ್ಲ. ಪ್ರಚಾರ ಪಡೆಯುವುದು ಎಂದು ತೋರುತ್ತದೆ ಎಂದು ಹೇಳಿ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.