“ತಮಿಳುನಾಡು: ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ಅನಿತಾ ಆರ್. ರಾಧಾಕೃಷ್ಣನ್ ಬಂಧನ!”

ಚೆನ್ನೈ: ತಮಿಳುನಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಪ್ರಕರಣದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಡಿಎಂಕೆ ಶಾಸಕ ಅನಿತಾ ಆರ್. ರಾಧಾಕೃಷ್ಣನ್ ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ತೂತುಕುಡಿಯಿಂದ ಸುಮಾರು 23 ಕಿಲೋಮೀಟರ್ ದೂರದಲ್ಲಿರುವ ಆತ್ತೂರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ್ದ ವೇಳೆ ಪೊಲೀಸರು ಅನಿತಾ ಆರ್ ರಾಧಾಕೃಷ್ಣನ್ ಅವರನ್ನು ಬಂಧಿಸಿದ್ದು, ಬಳಿಕ ಅಲ್ಲೇ ಕಾಯುತ್ತಿದ್ದ ಪೊಲೀಸ್ ಜೀಪಿನಲ್ಲಿ ಕರೆದೊಯ್ದರು ಎಂದು ಪೋಲೀಸರು ತಿಳಿಸಿದ್ದಾರೆ.

ಬಂಧನದ ವೇಳೆ ರಾಧಾಕೃಷ್ಣನ್ ಅವರ ಬೆಂಬಲಿಗರು ಸ್ಥಳದಲ್ಲಿ ಜಮಾಯಿಸಿದ್ದು, ಪೊಲೀಸರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು ಎಂದು ತಿಳಿದು ಬಂದಿದೆ.
ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಪರಿಶೀಲನಾ ಕಾರ್ಯ ನಡೆಸುತ್ತಿದ್ದ ಅನಿತಾ ಆರ್. ರಾಧಾಕೃಷ್ಣನ್ ಅವರನ್ನು ತುರ್ತಾಗಿ ಬಂಧಿಸಿದ ಔಚಿತ್ಯವನ್ನು ಪ್ರಶ್ನಿಸಿದ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಮಹಿಳೆಯರ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಯಲು ವಿಫಲವಾಗಿರುವ ಮತ್ತು ಇತರ ಪಕ್ಷಗಳ ಸದಸ್ಯರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುವುದರಲ್ಲೇ ತೊಡಗಿರುವ ಈ ಸರ್ಕಾರ ತರಲು ಬಯಸಿರುವ ಬದಲಾವಣೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.
ಆಡಳಿತಾರೂಢ ಟಿವಿಕೆ ಪಕ್ಷದ ಶಾಸಕರೊಬ್ಬರು ಭಾಗಿಯಾಗಿದ್ದಾರೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿರುವ ದೂರಿನ ಕುರಿತು ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.
ಡಿಎಂಕೆ ಸಂಸದೆ ಕನಿಮೊಳಿ ಕೂಡ ಬಂಧನವನ್ನು ಖಂಡಿಸಿದ್ದು ಇಂತಹ ದಮನಕಾರಿ ತಂತ್ರಗಳಿಗೆ ಡಿಎಂಕೆ ಪಕ್ಷ ಮಣಿಯುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ತಿರುಚೆಂದೂರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಧಾಕೃಷ್ಣನ್ ಅವರು, ಜೂನ್ 20ರಂದು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರೆಂದು ಆರೋಪಿಸಲಾಗಿತ್ತು. ಇದನ್ನು ಆಧರಿಸಿ ಆಡಳಿತಾರೂಢ ಟಿವಿಕೆ ಪಕ್ಷವು ಪೊಲೀಸರಿಗೆ ದೂರು ನೀಡಿತ್ತು.