ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಭರ್ಜರಿ ಕಂಬ್ಯಾಕ್!

ಮುಂಬೈ: ಡಿ.9ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ (BCCI) ಆಯ್ಕೆ ಸಮಿತಿಯು ಬಲಿಷ್ಠ ತಂಡ ಪ್ರಕಟಮಾಡಿದೆ. ಸೂರ್ಯಕುಮಾರ್ ನಾಯಕತ್ವದಲ್ಲಿ ಟೀಂ ಇಂಡಿಯಾ (Team India) ಏಕದಿನ ನಾಯಕ ಶುಭಮನ್ ಗಿಲ್ ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಮಾಡಿದ್ದಾರೆ.

ಕುತ್ತಿಗೆ ನೋವಿನಿಂದಾಗಿ ಪ್ರಸ್ತುತ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯಿಂದ ದೂರ ಉಳಿದ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ (Shubman Gill), ಟಿ20 ಏಷ್ಯಾಕಪ್ ಬಳಿಕ ಇಂಜುರಿ ಸಮಸ್ಯೆಗೆ ಒಳಗಾಗಿದ್ದ ಹಾರ್ದಿಕ್ ಪಾಂಡ್ಯ (Hardik Pandya) ಈಗ ಚೇತರಿಸಿಕೊಂಡಿದ್ದು, ಮತ್ತೆ ಟಿ20 ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೂ ಟಿ20 ತಂಡದಲ್ಲಿ ಹೊಸ ಮುಖಗಳಿಗೆ ಮಣೆ ಹಾಕದ ಬಿಸಿಸಿಐ ಏಷ್ಯಾಕಪ್ ಟೂರ್ನಿ ವೇಳೆ ಆಯ್ಕೆ ಮಾಡಿದ್ದ ತಂಡವನ್ನೇ ಆಫ್ರಿಕಾ (South Africa) ವಿರುದ್ಧದ ಸರಣಿಗೆ ಆಯ್ಕೆ ಮಾಡಿದೆ.

ಟಿ20 ಸರಣಿಗೆ ಟೀಂ ಇಂಡಿಯಾ ಹೇಗಿದೆ?
ಸೂರ್ಯ ಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅರ್ಷ್ದೀಪ್ ಸಿಂಗ್, ಕುಲ್ದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್.

ಟಿ20 ನಲ್ಲಿ ಅಬ್ಬರಿಸಲು ಗಿಲ್ ರೆಡಿ
ಗಿಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಕೋಲ್ಕತ್ತಾ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕುತ್ತಿಗೆ ನೋವಿಗೆ ಒಳಗಾಗಿದ್ದರು. ನಂತರ ಗುವಾಹಟಿ ಪಂದ್ಯ ಮತ್ತು ಪ್ರಸ್ತುತ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಮುಂಬೈನ ಬೆನ್ನುಮೂಳೆಯ ತಜ್ಞರು ಅವರಿಗೆ ವಿಶ್ರಾಂತಿ ಸೂಚಿಸಿದ್ದರು. ಹಾಗಾಗಿ, ಅವರು ಡಿ. 1 ರಂದು ಗಿಲ್ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ತಲುಪಿದ್ದು, ಆಗಿನಿಂದಲೂ ಅಲ್ಲಿನ ರೀಹ್ಯಾಬಿಲಿಟೇಷನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಗಿಲ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಈಗಾಗಲೇ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ. ಡಿ.9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮರಳಲು ಸಜ್ಜಾಗಿದ್ದಾರೆ.

ಇನ್ನೂ ಟಿ20 ಏಷ್ಯಾಕಪ್ ಟೂರ್ನಿ ಬಳಿಕ ಇಂಜುರಿ ಸಮಸ್ಯೆಗೆ ಗುತ್ತಾಗಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಫಿಟ್ ಆಗಿದ್ದಾರೆ. ಈ ಹಿನ್ನೆಲೆ ಟಿ20 ತಂಡಕ್ಕೆ ಸೇರ್ಪಡೆಯಾಗಿದ್ದಾರೆ.