ಕಾಶ್ಮೀರದಲ್ಲಿ ಪುಲ್ವಾಮಾ ನಂತರದ ಭಯಾನಕ ದಾಳಿ – ಪ್ರವಾಸಿಗರ ಮೇಲೆ ಉಗ್ರರ ಗುಂಡು ಮಳೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರವನ್ನು ಪ್ರವಾಸಿಗರ ಪಾಲಿನ ಭೂಲೋಕದ ಸ್ವರ್ಗವೆಂದೇ ಕರೆಯುತ್ತಾರೆ. ಕೆಲವು ವರ್ಷಗಳ ಹಿಂದೆ ಕಾಶ್ಮೀರಕ್ಕೆ (Jammu Kashmir) ಪ್ರವಾಸಿಗರು ಹೋಗಲು ಭಯಪಡುವ ಪರಿಸ್ಥಿತಿಯಿತ್ತು. ಇಲ್ಲಿ ಉಗ್ರರ ಅಟ್ಟಹಾಸ ಮಿತಿ ಮೀರಿತ್ತು. ಕಾಶ್ಮೀರಿ ಪಂಡಿತರು, ಕಾಶ್ಮೀರಿ ಸ್ಥಳೀಯ ನಿವಾಸಿಗಳು ಹಾಗೂ ಪ್ರವಾಸಿಗರು ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಇತ್ತೀಚಿನ ಕೆಲವು ವರ್ಷಗಳಲ್ಲಿ ಕಾಶ್ಮೀರ ಮತ್ತೆ ತನ್ನತ್ತ ಪ್ರವಾಸಿಗರನ್ನು ಸೆಳೆಯತೊಡಗಿತ್ತು. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಮಾಡಿದ ನಂತರ ಅಲ್ಲಿನ ಪ್ರವಾಸೋದ್ಯಮ ಮತ್ತಷ್ಟು ಗರಿಗೆದರಿತ್ತು.
ಪ್ರವಾಸಿಗರು ಕೂಡ ಅಲ್ಲಿನ ಹಿಮಪಾತ, ಪ್ರಕೃತಿ ಸೌಂದರ್ಯವನ್ನು ಸವಿಯಲು ಭಾರತದಿಂದ ಮಾತ್ರವಲ್ಲದೆ ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಬರಲಾರಂಭಿಸಿದ್ದರು. ಇದು ಹಿಮಪಾತದ ಸೀಸನ್ ಆದ್ದರಿಂದ ಕಾಶ್ಮೀರದಲ್ಲಿ ಸಹಜವಾಗಿಯೇ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಆದರೆ, ಹಿಮದಿಂದ ಬಿಳಿ ಸೆರಗು ಹೊದ್ದು ಕುಳಿತ ಕಾಶ್ಮೀರದ ಕಣಿವೆಯಲ್ಲಿ ಇಂದು ರಕ್ತದೋಕುಳಿಯಾಗಿದೆ. ಪುಲ್ವಾಮಾ ದಾಳಿಯ ನಂತರ ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ನಡೆದ ಅತಿ ದೊಡ್ಡ ಉಗ್ರರ ದಾಳಿ ಇದಾಗಿದೆ.