ಶೆಟ್ಟಳ್ಳಿ ಗ್ರಾಮದಲ್ಲಿ ಆರು ಜಾನುವಾರುಗಳ ದಿಢೀರ್ ಸಾ*ವು

ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಜಾನುವಾರುಗಳು ದಿಢೀರ್ ಸಾವನ್ನಪ್ಪಿರುವ ಘಟನೆ ಸಂಭವಿಸಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮದ ಹೊರವಲಯದ ಕಾಡಿನಲ್ಲಿ ಮೇವು ಮೇಯ್ದು ಮರಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಜಾನುವಾರುಗಳು ಅಸ್ವಸ್ಥಗೊಂಡು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಮೃತಪಟ್ಟ ಜಾನುವಾರುಗಳು ಗ್ರಾಮ ನಿವಾಸಿ ಪರಶಿವ ಅವರಿಗೆ ಸೇರಿದ್ದಾಗಿವೆ.
ಸಾವಿಗೆ ಸ್ಪಷ್ಟ ಕಾರಣ ತಿಳಿದುಬರದೇ ಇರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ವಿಷಕಾರಿ ಸಸ್ಯ ಸೇವನೆ ಅಥವಾ ಇತರೆ ಕಾರಣಗಳಿಂದ ಜಾನುವಾರುಗಳು ಸಾವನ್ನಪ್ಪಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾವಿನ ನಿಖರ ಕಾರಣ ಪತ್ತೆ ಹಚ್ಚಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
