ಹೈದರಾಬಾದ್-ವಿಜಯಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು

ಹೈದರಾಬಾದ್: ಸರ್ಕಾರಿ ಬಸ್ (RTC Bus) ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾದ ಪರಿಣಾಮ ಕನಿಷ್ಟ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (Hyderabad–Bijapur Highway) ನಡೆದಿದೆ.

ರಂಗಾರೆಡ್ಡಿ (Ranga Reddy) ಜಿಲ್ಲೆಯ ಚೆವೆಲ್ಲಾದ (Chevella) ಮಿರ್ಜಾಗುಡ ಗ್ರಾಮದ ಬಳಿ ದುರಂತ ಸಂಭವಿಸಿದೆ. ಬಸ್ನಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಟಿಪ್ಪರ್ ಪಲ್ಟಿಯಾದ ಪರಿಣಾಮ ಜಲ್ಲಿಕಲ್ಲಿನ ಕೆಳಗೆ ಪ್ರಯಾಣಿಕರು ಸಿಲುಕಿಕೊಂಡಿದ್ದರು. ಘಟನೆಯಲ್ಲಿ 20 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳದಲ್ಲಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಟಿಪ್ಪರ್ ಚಾಲಕನ ಅತಿವೇಗದ ಚಾಲನೆಯಿಂದ ಘಟನೆ ಸಂಭವಿಸಿದೆ. ಅಪಘಾತದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದು, ಗಾಯಾಳುಗಳು ಮತ್ತು ಮೃತ ಪ್ರಯಾಣಿಕರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕೆಂದು ಸೂಚಿಸಿದ್ದಾರೆ.