ಉಳ್ಳಾಲ: ದುರಂತ ಪರಿಹಾರದಲ್ಲಿ ವಿಳಂಬ ಅಸ್ವೀಕಾರ – ಸ್ಪೀಕರ್ ಯು.ಟಿ. ಖಾದರ್ ಕಿಡಿ

ಉಳ್ಳಾಲ: ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯವನ್ನು ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಬುಧವಾರ ಮಂಗಳೂರು ವಿಶ್ವವಿದ್ಯಾ ನಿಲಯದ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಉಳ್ಳಾಲ ತಾಲೂಕು ಮಟ್ಟದ ಕುಡಿಯುವ ನೀರಿನ ಯೋಜನೆ, ಅತಿವೃಷ್ಟಿ ಅನಾವೃಷ್ಟಿ ಕುರಿತು ಉಳ್ಳಾಲ ತಾಲೂಕು ಮಟ್ಟದ ಅಧಿ ಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮಳೆಹಾನಿ, ಮನೆಕುಸಿತ, ಕಾಡುಪ್ರಾಣಿಗಳ ದಾಳಿ ಸಹಿತ ವಿವಿಧ ಪ್ರಾಕೃತಿಕ ಘಟನೆಗಳು ಸಂಭವಿಸಿದಾಗ ಸಂತ್ರಸ್ತರಿಗೆ ಪರಿಹಾರ ನೀಡಲು ದಾಖಲೆಗಳ ಕೊರತೆಯ ನೆಪದಲ್ಲಿ ಪರಿಹಾರ ವಿಳಂಬಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದೆ.
ಘಟನೆಗಳು ನಡೆದಿರುವುದು ವಾಸ್ತವ ಆಗಿದ್ದರೂ ಸಾರ್ವಜನಿಕರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿ ಕಾರಿಗಳು ಘಟನೆಗಳ ಬಗ್ಗೆ ಆಯಾಯ ಸ್ಥಳಗಳಿಗೆ ಭೇಟಿ ನೀಡಿ ದೃಢೀಕರಿಸಿ ಪರಿಹಾರವನ್ನು ತ್ವರಿತವಾಗಿ ವಿತರಿಸಬೇಕು ಅವರು ಕಟ್ಟುನಿಟ್ಟಾಗಿ ಸೂಚಿಸಿದರು.
ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಗ್ರಾ.ಪಂ.ಗಳು, ನಗರ ಸ್ಥಳೀಯ ಸಂಸ್ಥೆಗಳು ಕಂದಾಯ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಸಂಶಯದ ಮೇಲೆ ಜನರಿಗೆ ಪರಿಹಾರ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಸ್ಪೀಕರ್ ಹೇಳಿದರು.
ಗ್ರಾ.ಪಂ. ಸಿಸಿ ಪಡೆದು ವಿದ್ಯುತ್ ಸಂಪರ್ಕ ನೀಡಿ
ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾ.ಪಂ. ಡೋರ್ ನಂಬರ್ ದಾಖಲೆಗಳನ್ನು ಸಲ್ಲಿಸಿದ ಅನಂತರವೂ ವಾಸ ಯೋಗ್ಯ ಪ್ರಮಾಣ ಪತ್ರ ನೀಡಲು ಕೇಳುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ಷೇಪಿಸುತ್ತಿದ್ದಾರೆ. ಇದರಿಂದ ವಿದ್ಯುತ್ ಸಂಪರ್ಕ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಮನೆ ನಿರ್ಮಿಸಿದ ಅನಂತರ ಗ್ರಾಮ ಪಂಚಾಯತ್ ಸಿಸಿ ಪಡೆದು ವಿದ್ಯುತ್ ಸಂಪರ್ಕ ನೀಡುವಂತೆ ಅವರು ಸೂಚಿಸಿದರು.
ಐದು ವರ್ಷಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಈ ತಿಂಗಳಲ್ಲಿ ಆರಂಭವಾಗಲಿದ್ದು, ಎಲ್ಲ ಪ್ರಮುಖ ರಸ್ತೆಗಳನ್ನು ಸುಸಜ್ಜಿತಗೊಳಿಸಬೇಕು. ದೇಶದ ವಿವಿಧ ಕಡೆಗಳಿಂದ ಭಕ್ತಾಧಿಗಳು ಬರುವುದರಿಂದ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿ ಕಾರಿಗಳಿಗೆ ಅವರು ಸೂಚಿಸಿದರು.
ತೊಕ್ಕೊಟ್ಟು – ಮುಡಿಪು ರಸ್ತೆಯ ಚತುಷ್ಪಥ ಕಾಮಗಾರಿ ಮುಗಿದ ನಂತರ ಚರಂಡಿ, ಫುಟ್ಪಾತ್ ಮತ್ತಿತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಸಜಿಪ-ತುಂಬೆ ನಡುವೆ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಕೈಗೆತ್ತಿಕೊಳ್ಳಲು ಯು.ಟಿ. ಖಾದರ್ ಅಧಿ ಕಾರಿಗೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸಿ
ಕುಡಿಯುವ ನೀರಿನ ಯೋಜನೆಗಳನ್ನು ಭವಿಷ್ಯದ 30 ವರ್ಷಗಳ ಜನಸಂಖ್ಯೆಯ ಗಮನ ದಲ್ಲಿಟ್ಟು ಕೊಂಡು ಕಾಮಗಾರಿ ನಡೆಸಬೇಕು. ಯಾವುದೇ ಕುಡಿಯುವ ನೀರಿನ ಯೋಜನೆಯಲ್ಲಿ ಮನೆ ಮನೆಗೆ ನಳ್ಳಿ ನೀರಿನ ಸಂಪರ್ಕ ನೀಡಲು ಸಾರ್ವಜನಿಕರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪೈಪ್ಲೈನ್ ಅಳವಡಿಕೆ ಮತ್ತು ಟ್ಯಾಂಕ್ ನಿರ್ಮಾಣ ಕಾಮಗಾರಿಯಲ್ಲಿ ಕಂಡು ಬಂದಿರುವ ಎಲ್ಲ ಸಮಸ್ಯೆಗೆ ಮುಂದಿನ 15 ದಿನಗಳೊಳಗೆ ಅ ಧಿಕಾರಿಗಳು ಗ್ರಾಮ ಪಂಚಾಯತ್ಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಅವರು ಅಧಿ ಕಾರಿಗಳಿಗೆ ಸೂಚಿಸಿದರು.
ಉಳ್ಳಾಲ ನಗರಸಭೆ ಅಧ್ಯಕ್ಷೆ ಶಶಿಕಲಾ, ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು, ಉಳ್ಳಾಲ ತಾ.ಪಂ. ಕಾರ್ಯನಿರ್ವಹಣಾಧಿ ಕಾರಿ ಗುರುದತ್, ವಿವಿಧ ಇಲಾಖೆ ಅ ಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಪಿಡಿಒಗಳು ಉಪಸ್ಥಿತರಿದ್ದರು.
ಸಂಭವನೀಯ ಗುಡ್ಡ ಕುಸಿತ ಗುರುತಿಸಿ ಕ್ರಮಕೈಗೊಳ್ಳಿ
ಮುಂಬರುವ ಮಳೆಗಾಲದಲ್ಲಿ ಸಂಭವನೀಯ ಗುಡ್ಡ ಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ನದಿತೀರ ಮುಳುಗಡೆ ಪ್ರದೇಶದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾ.ಪಂ.ಗಳು ಬೀದಿ ನಾಯಿಗಳ ಸಮೀಕ್ಷೆ ಮಾಡಿ ಅವುಗಳ ನಿರ್ವಹಣೆಗೆ ಪ್ರತ್ಯೇಕ ಮೀಸಲಿಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ತೆರವುಗೊಳಿಸಬೇಕು. ಮಳೆಗಾಲದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಖಾದರ್ ಅವರು ಅಧಿ ಕಾರಿಗಳಿಗೆ ಸೂಚಿಸಿದರು.
ಸಮನ್ವಯದಿಂದ ಕಾರ್ಯನಿರ್ವಹಿಸಿ
ಗ್ರಾ.ಪಂ. ಸದಸ್ಯರು, ಸ್ಥಳೀಯ ಮಟ್ಟದ ಅಧಿ ಕಾರಿಗಳು ಸಮನ್ವಯದಿಂದ ತಂಡ ಮಾದರಿ ಯಲ್ಲಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳ ಬಗ್ಗೆ ಪರಸ್ಪರ ಆರೋಪಿಸುವ ಬದಲು ಅದರ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಲೋಕೋಪಯೋಗಿ ರಸ್ತೆಗಳ ಬದಿಗಳಲ್ಲಿ ತಾತ್ಕಾಲಿ ಕವಾಗಿ ಚಪ್ಪರ, ಶೀಟ್ ಹಾಕಿ ವ್ಯಾಪಾರ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಆದರೆ ತಳ್ಳುಗಾಡಿ ಅಥವಾ ಅಂದಂದೇ ಸರಕುಗಳನ್ನು ತಂದು ಹೋಗುವ ವ್ಯಾಪಾರಿಗಳಿಗೆ ತೊಂದರೆ ಕೊಡದಂತೆ ಖಾದರ್ ಅವರು ಪಿಡಬ್ಲ್ಯುಡಿ ಅಧಿ ಕಾರಿಗಳಿಗೆ ಸೂಚಿಸಿದರು.