ವಿಜಯಪುರ: ಕೇಸರಿ ಶಾಲು ವಿತರಣೆಗೆ ಯತ್ನಿಸಿದ ಶಾಸಕ ಯತ್ನಾಳ್ ಮತ್ತು ಬೆಂಬಲಿಗರ ಬಂಧನ; ಬಳಿಕ ಬಿಡುಗಡೆ!

ವಿಜಯಪುರ : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಸರಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ್ ಅವರ ಬೆಂಬಲಿಗರು ಬೆಳಗ್ಗೆ ನಗರದ ದರ್ಬಾರ್ ಹೈಸ್ಕೂಲ್ ಮತ್ತು ಕಾಲೇಜು ಆವರಣದ ಬಳಿ ಕೇಸರಿ ಶಾಲುಗಳೊಂದಿಗೆ ಜಮಾಯಿಸಿದ್ದರು.
ವಿದ್ಯಾರ್ಥಿಗಳಿಗೆ ಶಾಲು ಹಂಚಲು ಸಿದ್ಧತೆ ನಡೆಸುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು.

ಸ್ಥಳಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಮಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದಾಗ ಪೊಲೀಸರು, ಶಾಸಕರು ಹಾಗೂ ಅವರ ಬೆಂಬಲಿಗರನ್ನು ವಶಕ್ಕೆ ಪಡೆದರು.
ಇದರಿಂದ ಆಕ್ರೋಶಗೊಂಡ ಬೆಂಬಲಿಗರು ಪೊಲೀಸ್ ವಾಹನಕ್ಕೆ ಅಡ್ಡ ಕುಳಿತು ಪ್ರತಿಭಟಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ವಶಕ್ಕೆ ಪಡೆದಿದ್ದ ಯತ್ನಾಳ್ ಮತ್ತು ಬೆಂಬಲಿಗರನ್ನು ನಂತರ ಬಿಡುಗಡೆ ಮಾಡಲಾಯಿತು.
ನಿರ್ಧಾರ ಮರುಪರಿಶೀಲನೆಗೆ ಯತ್ನಾಳ್ ಆಗ್ರಹ :
ಬಿಡುಗಡೆಯಾದ ಬಳಿಕ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಯತ್ನಾಳ್, ಹಿಜಾಬ್ಗೆ ನೀಡಿರುವ ಅನುಮತಿಯನ್ನು ಸರಕಾರ ತಕ್ಷಣವೇ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.