Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗೋವಾದಲ್ಲಿ ಕನ್ನಡಿಗರ ಭಾಷಾ ಹಕ್ಕಿಗಾಗಿ ಧ್ವನಿ: ಕನ್ನಡ ಮಾಧ್ಯಮ ಶಾಲೆಗಳ ಸಂರಕ್ಷಣೆಗೆ ಸರ್ಕಾರದ ಮಧ್ಯಪ್ರವೇಶಕ್ಕೆ ಕನ್ನಡ ಪರ ಹೋರಾಟಗಾರರು, ರಾಜಕಾರಣಿಗಳ ಆಗ್ರಹ!

Spread the love

ಬೆಂಗಳೂರು: ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಶಿಕ್ಷಣ ತಜ್ಞರು, ರಾಜಕಾರಣಿಗಳು ಹಾಗೂ ಕನ್ನಡಪರ ಹೋರಾಟಗಾರರು ಈ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದು, ಇದು ಕೇವಲ ಶಿಕ್ಷಣದ ಪ್ರಶ್ನೆಯಲ್ಲ, ಗಡಿ ರಾಜ್ಯದಲ್ಲಿ ವಾಸಿಸುವ ಸಾವಿರಾರು ಕನ್ನಡಿಗರ ಭಾಷಾ ಹಾಗೂ ಸಾಂಸ್ಕೃತಿಕ ಹಕ್ಕುಗಳಿಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಎಚ್ಚರಿಸಿದ್ದಾರೆ.

ಬೆಳಗಾವಿ ಜಿಲ್ಲೆಯವರಾದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಪ್ರತಿನಿಧಿ(The New Indian Express) ಜೊತೆ ಮಾತನಾಡಿ, ಗೋವಾದಲ್ಲಿ ನೆಲೆಸಿರುವ ಲಕ್ಷಾಂತರ ಕನ್ನಡಿಗರ ಮಾತೃಭಾಷೆ ಕನ್ನಡವಾಗಿದ್ದು, ಶಿಕ್ಷಣದ ಮಾಧ್ಯಮವಾಗಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಕನ್ನಡ ಮಾಧ್ಯಮ ಶಾಲೆಗಳನ್ನು ಸಂರಕ್ಷಿಸಬೇಕು. ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡುತ್ತೇನೆ. ಗೋವಾದಲ್ಲಿ ಮುಖ್ಯವಾಗಿ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಿಂದ ವಲಸೆ ಹೋದ ಸುಮಾರು 4–5 ಲಕ್ಷ ಕನ್ನಡಿಗರು ವಾಸಿಸುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಮಾಜಿ ಪ್ರಾಥಮಿಕ ಶಿಕ್ಷಣ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್. ವಿಶ್ವನಾಥ್, ತಮ್ಮ ಸಚಿವ ಅವಧಿಯಲ್ಲಿ ಗೋವಾ ಮತ್ತು ದಕ್ಷಿಣ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದುದನ್ನು ನೆನಪಿಸಿಕೊಂಡು, ಈ ಶಾಲೆಗಳು ಕನ್ನಡ ಮಾತನಾಡುವ ಕುಟುಂಬಗಳು ಮತ್ತು ಅವರ ಮಾತೃಭಾಷೆಯ ನಡುವಿನ ಮಹತ್ವದ ಕೊಂಡಿಯಾಗಿವೆ ಎಂದು ಹೇಳಿದರು.

ಈ ಶಾಲೆಗಳು ಕನ್ನಡದಲ್ಲೇ ಶಿಕ್ಷಣ ನೀಡುತ್ತಿವೆ. ಆದ್ದರಿಂದ ಅವುಗಳನ್ನು ಉಳಿಸಿ ಬೆಳೆಸಬೇಕು ಎಂದು ವಿಶ್ವನಾಥ್ ಅಭಿಪ್ರಾಯಪಟ್ಟರು.

ಮಾಜಿ ಪ್ರಾಥಮಿಕ ಶಿಕ್ಷಣ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಕೂಡ ಈ ವಿಚಾರವನ್ನು ಸೂಕ್ಷ್ಮವಾಗಿ ನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದ್ದು, ಗಡಿ ಪ್ರದೇಶಗಳಲ್ಲಿನ ಭಾಷಾ ಗುರುತಿನ ಪ್ರಶ್ನೆಯನ್ನು ಕೇವಲ ಆಡಳಿತಾತ್ಮಕ ದೃಷ್ಟಿಕೋನದಿಂದ ನೋಡದೆ, ಸಂವೇದನಾಶೀಲವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಗಡಿ ಪ್ರದೇಶಗಳಲ್ಲಿರುವ ಶಾಲೆಗಳ ವಿಷಯವನ್ನು ಅತ್ಯಂತ ಸೂಕ್ಷ್ಮವಾಗಿ ನಿರ್ವಹಿಸಬೇಕು. ಅಲ್ಲಿ ವಾಸಿಸುವ ಕುಟುಂಬಗಳಿಗೆ ತಮ್ಮ ಮಾತೃಭಾಷೆಯೊಂದಿಗೆ ಗಾಢವಾದ ಭಾವನಾತ್ಮಕ ಬಾಂಧವ್ಯವಿದೆ. ಪ್ರತಿಯೊಂದು ರಾಜ್ಯ ಸರ್ಕಾರವೂ ಈ ಭಾವನೆಗಳನ್ನು ಗೌರವಿಸಬೇಕು.

ಗೋವಾ ಸರ್ಕಾರವೂ ಈ ವಿಷಯವನ್ನು ಅಗತ್ಯವಿರುವಷ್ಟು ಸಂವೇದನಾಶೀಲತೆಯಿಂದ ಪರಿಗಣಿಸಿ, ಈ ಶಾಲೆಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.

ಈ ವಿಚಾರದ ಕುರಿತು ಹೊಸದಾಗಿ ಚರ್ಚೆ ಆರಂಭವಾಗಲು ಕಾರಣ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಶ್ರೀ ಶಾಂತಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿರುವ ಮನವಿ ಪತ್ರವಾಗಿದೆ. ಗೋವಾ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಉಲ್ಲೇಖಿಸಿ ಈಗಾಗಲೇ ನಾಲ್ಕು ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿದ್ದು, ಇನ್ನೂ 17 ಶಾಲೆಗಳಲ್ಲಿ ಕನ್ನಡ ಶಿಕ್ಷಕರೇ ಇಲ್ಲ ಎಂದು ಆ ಮನವಿಯಲ್ಲಿ ಆರೋಪಿಸಲಾಗಿದೆ.

ಇದಲ್ಲದೆ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ , ಶಾಲೆಗಳು ಹೊಸ ಶಿಕ್ಷಣ ನೀತಿಗೆ ಹೊಂದಿಕೊಳ್ಳಬೇಕು ಎಂದು ಹೇಳಿರುವ ವರದಿಗಳ ಬಗ್ಗೆ ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದ್ದು, ಇಂತಹ ನಿಲುವು ಗೋವಾದ ಗಡಿ ಭಾಗಗಳಲ್ಲಿ ವಾಸಿಸುವ ಕನ್ನಡ ಭಾಷಿಕ ಸಮುದಾಯಗಳಲ್ಲಿ ಅನಿಶ್ಚಿತತೆ ಮತ್ತು ಆತಂಕವನ್ನು ಉಂಟುಮಾಡಿದೆ ಎಂದು ಹೇಳಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *